ಎದೆಯು ಮರಳಿ ತೊಳಲುತಿದೆ,
ದೊರೆಯುದದನೆ ಹುಡುಕುತಿದೆ;
ಅತ್ತ ಇತ್ತ ದಿಕ್ಕುಗೆಟ್ಟು
ಬಳ್ಳಿಬಾಳು ಚಾಚುತಿದೆ
ತನ್ನ ಕುಡಿಯನು.
ಸಿಗಲಾರದ ಆಸರಕೆ
ಕಾದ ಕಾವ ಬೇಸರಕೆ
ಮಿಡುಕಿ ದುಡುಕಲೆಳಸುತಿದೆ
ತನ್ನ ಗಡಿಯನು.
ಅದಕು ಇದಕು ಅಂಗಲಾಚಿ
ತನ್ನೊಲವಿಗೆ ತಾನೆ ನಾಚಿ
ದಡವ ಮುಟ್ಟಿ ಮುಟ್ಟದೊಲು
ಹಿಂದೆಗೆಯುವ ವೀಚಿ ವೀಚಿ
ಮುರುಟದಲಿದೆ ಮನದಲಿ !
ನೀರದಗಳ ದೂರತೀರ
ಕರೆಯುತಲಿದೆ ಎದೆಯ ನೀರ,
ಮೀರುತಲಿದೆ ಹೃದಯಭಾರ
ತಾಳಲೆಂತು ನಾ ?
ಯಾವ ಬಲವು ಯಾವ ಒಲವು
ಕಾಯಬೇಕೋ ಅದರ ಹೊಳವು
ಕಾಣದೆ ದಳ್ಳಿಸಲು ಮನವು
ಬಾಳಲೆಂತು ನಾ ?
----- ಎಮ್. ಗೋಪಾಲಕೃಷ್ಣ ಅಡಿಗ.